ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಆದೇಶಿಸಿದ್ದು, ಸರಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ, ಸಂವಿಧಾನದ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಹಾಗೂ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹತ್ತು ಸಾವಿರ ಭಾರತ್ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದ್ದು, ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಈ ಸಂಘಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ವಿಕಾಸಶೀಲ ಮತ್ತು ಸೌಹಾರ್ದಶೀಲ ರಾಜ್ಯ ನಿರ್ಮಾಣಕ್ಕಾಗಿ, ಸಮುದಾಯ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ, ಕ್ರೀಡೆ, ಫಿಟ್ನೆಸ್ ಮತ್ತು ಕೌಶಲ್ಯಾಭಿವೃದ್ಧಿಯ ಮೂಲಕ ಯುವಜನರನ್ನು ಸಬಲೀಕರಣಗೊಳಿಸಿ, ತಳಮಟ್ಟದ ಆಡಳಿತದಲ್ಲಿ ಸಕ್ರೀಯ ಪಾಲುದಾರರನ್ನಾಗಿ ಮಾಡಲು ಸಶಕ್ತ ಯುವಜನರನ್ನೊಳಗೊಂಡ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲಾಗುತ್ತಿದೆ ಎಂದರು.
ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ತಲಾ ಒಂದರAತೆ ಭಾರತ್ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲಾಗಿದ್ದು, ಅದೇ ರೀತಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸರಾಸರಿ 4000 ಜನಸಂಖ್ಯೆಗೆ ಒಂದರಂತೆ, ಪುರಸಭೆ ವ್ಯಾಪ್ತಿಯಲ್ಲಿ ಸರಾಸರಿ 6000 ಜನಸಂಖ್ಯೆಗೆ ಒಂದರಂತೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಸರಾಸರಿ 8000 ಜನಸಂಖ್ಯೆಗೆ ಒಂದು ಸಂಘವನ್ನು ಸ್ಥಾಪಿಸುವಂತೆ ತಿಳಿಸಿದ ಅವರು, ಪ್ರತಿ ಸಂಘಕ್ಕೆ ಸರ್ಕಾರದಿಂದ ಹಂತಹಂತವಾಗಿ ಅನುದಾನವನ್ನು ನೀಡಲಾಗುವುದು ಎಂದರು.
ಕನಿಷ್ಟ 16 ರಿಂದ ಗರಿಷ್ಟ 35 ವರ್ಷದೊಳಗಿನ ಯುವಕ – ಯುವತಿಯರು ಈ ಸಂಘಗಳಲ್ಲಿ ಸದಸ್ಯರಾಗಬಹುದು. ಪ್ರತಿ ಸಂಘದಲ್ಲಿ ಕನಿಷ್ಟ 100 ಜನ ಯುವ ಸದಸ್ಯರು ಇರುವುದು ಕಡ್ಡಾಯ ಎಂದ ಅವರು, ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಸಂಬAಧಿಸಿದAತೆ ಆಗಸ್ಟ್ 6 ರಿಂದ ಬಿ.ಜೆ.ವೈ.ಎಸ್ ವೆಬ್ಸೈಟ್ನಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಯುವಜನರು ಅದರಲ್ಲಿ ನೋಂದಣಿ ಮಾಡಿಕೊಂಡು ಸದಸ್ಯತ್ವ ಪಡೆಯಬಹುದಾಗಿದೆ ಎಂದರು.
ಪ್ರತಿ ಸಂಘವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ 15 ಜನ ಸದಸ್ಯರನ್ನು ಒಳಗೊಂಡ ಆಂತರಿಕ ಕಾರ್ಯಕಾರಿ ಸಮಿತಿಯನ್ನು ಹೊಂದಿರಲಿದೆ. ಇದರಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಜಿ ಹಾಗೂ 12 ಜನರ ಕಾರ್ಯಕಾರಿ ಸದಸ್ಯರು ಇರಲಿದ್ದಾರೆ ಎಂದ ಅವರು, ಮಹಿಳಾ ಪ್ರಾತಿನಿಧ್ಯ, ಮೀಸಲಾತಿಯನ್ನು ಕಡ್ಡಾಯವಾಗಿ ಮಾಡಬೇಕು ಎಂದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಯುವಜನರ ಸಕ್ರೀಯ ಭಾಗವಹಿಸುವಿಕೆಯನ್ನು ಖಚಿತಪಡಿಸಿ, ಸಂಘಗಳ ರಚನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಿದ ಅವರು, ಭಾರತ್ ಜೋಡೋ ಕಾರ್ಯಕ್ರಮದ ಕುರಿತು ಜನಸಾಮಾನ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಜಿಂಗಲ್ಸ್ ಸೇರಿದಂತೆ ಮತ್ತಿತರ ಪ್ರಚಾರ ಕಾರ್ಯಕ್ರಮಗಳನ್ನು ಕೈಗೊಂಡು ಹೆಚ್ಚು ಯುವಜನರು ನೋಂದಣಿ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಉದಯ್ ಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
















