ಕುಂದಾಪ್ರ ಡಾಟ್ ಕಾಂ ಸುದ್ದಿ.
ಕತಾರ್: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ, ದೋಹಾ ವತಿಯಿಂದ ಅಲ್ ಮಮೂರಾದ ಇಂಡಿಯನ್ ಕಲ್ಚರಲ್ ಸೆಂಟರ್ (ICC) ಆವರಣದಲ್ಲಿ ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ 500ಕ್ಕೂ ಅಧಿಕ ಭಾರತೀಯ ಸಮುದಾಯದ ಸದಸ್ಯರು ಹಾಗೂ ಭಾರತ ಸ್ನೇಹಿತರು ಭಾಗವಹಿಸಿದ್ದರು.

ಕಾರ್ಯಕ್ರಮವು ವಂದೇ ಮಾತರಂ ಗಾಯನದೊಂದಿಗೆ ಆರಂಭಗೊಂಡಿತು. ಬಳಿಕ ಕತಾರ್ನಲ್ಲಿನ ಭಾರತದ ಚಾರ್ಜ್ ದ’ಅಫೇರ್ಸ್ ಸಂದೀಪ್ ಕುಮಾರ್ ಅವರು ಬೆಳಗ್ಗೆ 6:45ಕ್ಕೆ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ಗಾಯನ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.
ತದನಂತರ ಮಾತನಾಡಿ, ಭಾರತ–ಕತಾರ್ ನಡುವಿನ ಬಲಿಷ್ಠ ಮತ್ತು ಸೌಹಾರ್ದಯುತ ಸಂಬಂಧ, ಇತ್ತೀಚಿನ ಉನ್ನತ ಮಟ್ಟದ ಭೇಟಿಗಳು ಹಾಗೂ ದ್ವಿಪಕ್ಷೀಯ ಸಹಕಾರದ ಕುರಿತು ವಿವರಿಸಿದರು. ಭಾರತವು ಸಂವಿಧಾನದ ಮೌಲ್ಯಗಳನ್ನು ಆಧಾರವಾಗಿಸಿಕೊಂಡು ಬಲಿಷ್ಠ ಹಾಗೂ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮುನ್ನಡೆಯುತ್ತಿರುವುದನ್ನು ಅವರು ಒತ್ತಿ ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ @2047’ ದೃಷ್ಟಿಕೋನ, ಭಾರತದ ಆರ್ಥಿಕ ಬೆಳವಣಿಗೆ, ಯುವಶಕ್ತಿಯ ಪ್ರಗತಿ, ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಉದ್ಯಮಶೀಲತೆ ಸೇರಿದಂತೆ ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶ, ಸೆಮಿಕಂಡಕ್ಟರ್ ಸೇರಿದಂತೆ ಹೊಸ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳನ್ನೂ ಅವರು ಪ್ರಸ್ತಾಪಿಸಿದರು.
ಕತಾರ್ನ ಅಮೀರ್ ಮಹಾಮಹಿಮ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ, ಕತಾರ್ ಸರ್ಕಾರ ಹಾಗೂ ಜನತೆಗೆ ಭಾರತೀಯ ಸಮುದಾಯದ ಮೇಲಿನ ನಿರಂತರ ಬೆಂಬಲ ಮತ್ತು ಪ್ರೋತ್ಸಾಹಕ್ಕಾಗಿ ಅವರು ಕೃತಜ್ಞತೆ ಸಲ್ಲಿಸಿದರು. ಕತಾರ್ನಲ್ಲಿರುವ ಭಾರತೀಯ ಸಮುದಾಯದ ಕಲ್ಯಾಣ ಮತ್ತು ಪ್ರಗತಿಗೆ ವಿವಿಧ ಭಾರತೀಯ ಸಂಘಟನೆಗಳು ನೀಡುತ್ತಿರುವ ಕೊಡುಗೆಯನ್ನು ಕೂಡ ಅವರು ಶ್ಲಾಘಿಸಿದರು.

ಈ ರಾಷ್ಟ್ರೀಯ ಸಂಭ್ರಮದಲ್ಲಿ ಕರ್ನಾಟಕ ಸಂಘ ಕತಾರ್ ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ ವಿಶೇಷ ಗಮನ ಸೆಳೆಯಿತು. ಸಂಘದ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ಸಲಹಾ ಮಂಡಳಿ ಸದಸ್ಯರು, ಕಾರ್ಯಕಾರಿ ಸಮಿತಿ ಸದಸ್ಯರು, ನಿರ್ವಹಣಾ ಸಮಿತಿ ಪ್ರತಿನಿಧಿಗಳು ಹಾಗೂ ಅಪಾರ ಸಂಖ್ಯೆಯ ಕನ್ನಡಿಗರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರು, ವಿದೇಶದಲ್ಲಿ ಭಾರತೀಯ ರಾಷ್ಟ್ರೀಯ ಹಬ್ಬದಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಗತಿ ಎಂದು ಹೇಳಿದರು. ಇಂತಹ ಕಾರ್ಯಕ್ರಮಗಳು ಭಾರತೀಯರ ನಡುವೆ ಏಕತೆ, ದೇಶಭಕ್ತಿ ಮತ್ತು ಸಹೋದರತ್ವವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ನಮ್ಮ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದ ಸದಸ್ಯರು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು. ‘ವಿಕಸಿತ ಭಾರತ @2047’ ವಿಷಯದ ಮೇಲೆ ರಾಯಭಾರ ಕಚೇರಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಹಾಗೂ ‘ಭಾರತ್ ಕೋ ಜಾನಿಯೇ (BKJ)’ ರಸಪ್ರಶ್ನೆಯ ಅತ್ಯುತ್ತಮ ಸಾಧಕರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನೇರವಾಗಿ ಭಾಗವಹಿಸಲು ಸಾಧ್ಯವಾಗದವರಿಗಾಗಿ ಭಾರತೀಯ ರಾಯಭಾರ ಕಚೇರಿಯ ಅಧಿಕೃತ ಫೇಸ್ಬುಕ್ ಮತ್ತು ಯೂಟ್ಯೂಬ್ ಮೂಲಕ ನೇರ ಪ್ರಸಾರ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ದೇಶಭಕ್ತಿ, ಏಕತೆ, ಭಾರತೀಯ ಹೆಮ್ಮೆ ಹಾಗೂ ಸಮುದಾಯದ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರತಿಬಿಂಬಿಸಿದ ಭಾರತದ 80ನೇ ಸ್ವಾತಂತ್ರ್ಯೋತ್ಸವದ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಭಾರತ–ಕತಾರ್ ನಡುವಿನ ಸ್ನೇಹಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಭಾರತೀಯ ಸಮುದಾಯದ ಮಹತ್ವದ ಪಾತ್ರವನ್ನು ಈ ಸಂಭ್ರಮ ಮತ್ತೊಮ್ಮೆ ಸಾರಿತು.
















