ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಸರಕಾರಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಆರೋಪ ಮಾಡಿ ಗುಜರಿ ವ್ಯಾಪಾರಿಯೊಬ್ಬರಲ್ಲಿ ಹಣಕ್ಕೆ ಬೇಡಿಕೆ ಇಟ್ಟು ಬೆದರಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಂಡ್ಮಿ ನಿವಾಸಿ ಗುಜರಿ ವ್ಯಾಪಾರಿ ಜಿ. ಮೊಹಮ್ಮದ್ ದೂರುದಾರರು. ಅವರಿಗೆ ಸಚಿನ್ ಕರೆ ಮಾಡಿ, ಎರಡು ಚೀಲ ಅಕ್ಕಿಯನ್ನು ನಿಮ್ಮ ಮನೆ ಅಂಗಳದಲ್ಲಿ ಇರಿಸಿರುವುದಾಗಿ ತಿಳಿಸಿದ್ದ.
ಬಳಿಕ ಮೊಹಮ್ಮದ್ ಅವರು ಮನೆಗೆ ಆಗಮಿಸಿದಾಗ ಸಚಿನ್ ರಿಕ್ಷಾದಲ್ಲಿ ಹಾಗೂ ನಾಗೇಂದ್ರ ಪುತ್ರನ್ ಮತ್ತು ಪ್ರದೀಪ್ ಬೈಕ್ನಲ್ಲಿ ಅಲ್ಲಿಗೆ ಬಂದಿದ್ದರು. ಈ ಸಂದರ್ಭ ನಾಗೇಂದ್ರ ಪುತ್ರನ್ ತಾನು ಸಾಮಾಜಿಕ ಕಾರ್ಯಕರ್ತನೆಂದು ಪರಿಚಯಿಸಿಕೊಂಡು ಮನೆಯ ಅಂಗಳದಲ್ಲಿದ್ದ ಅಕ್ಕಿ ಚೀಲಗಳ ದೃಶ್ಯವನ್ನು ಚಿತ್ರೀಕರಿಸಿರುವುದಾಗಿ ಹೇಳಿದ್ದಾನೆ. ಸರಕಾರಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಕುರಿತು ದೂರು ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ.
ಪ್ರಕರಣದಿಂದ ತಪ್ಪಿಸಿಕೊಳ್ಳಬೇಕಾದರೆ 2 ಲಕ್ಷರೂ. ನೀಡುವಂತೆ ಬೇಡಿಕೆ ಇಟ್ಟಿದ್ದು, ಹಣ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಅನಂತರ 1 ಲಕ್ಷ ರೂ. ನೀಡಬೇಕು. ಇಲ್ಲವಾದರೆ ಜನರನ್ನು ಹಾಗೂ ತನ್ನ ಹುಡುಗರನ್ನು ಕರೆಸಿ ಹೊಡೆದು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರನಲ್ಲಿ ವಿವರಿಸಲಾಗಿದೆ. ಮೊಹಮ್ಮದ್ ಅವರ ಮಕ್ಕಳು ಸ್ಥಳಕ್ಕೆ ಆಗಮಿಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾದರು ಎಂದೂ ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















