ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಪೋಷಕರ ನಡವಳಿಕೆಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ತಂದೆ ತಾಯಿಯನ್ನು ನೋಡಿ ನಮ್ಮ ಆಚಾರ ವಿಚಾರ, ಸಂಸ್ಕಾರಗಳನ್ನು ಮಗು ಕಲಿಯುತ್ತದೆ. ಹೀಗಾಗಿ ಉತ್ತಮ ಸಂಸ್ಕಾರವನ್ನು ಮಕ್ಕಳಿಗೆ ನೀಡಬೇಕು. ಶಿಶು ಮಂದಿರಗಳು ಮಕ್ಕಳಿಗೆ ಉತ್ತಮ ಸಂಸ್ಕಾರಭರಿತ ಶಿಕ್ಷಣವನ್ನು ನೀಡುವ ಪವಿತ್ರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಹೇಳಿದರು.
ಅವರು ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಶನಿವಾರ ಜರಗಿದ 40ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೇವಾ ಸಂಗಮ ಟ್ರಸ್ಟ್ನ ವಿಶ್ವಸ್ಥ ಕಾರ್ಯದರ್ಶಿ ಚಂದ್ರಿಕಾ ಧನ್ಯ ಬೌದ್ಧಿಕ್ ನೀಡಿದರು. ಮುಖ್ಯ ಅತಿಥಿಯಾಗಿದ್ದ ಮಂಗಳಾ ಗಣೇಶ ನಾಯಕ್ ಬಹುಮಾನ ವಿತರಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಶುಭ ಹಾರೈಸಿದರು. ಶಿಶು ಮಂದಿರದ ಸದಸ್ಯರಾದ ಉಷಾ ಪಾಂಡುರಂಗ ಮಡಿವಾಳ, ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಮಾತಾಜಿ ಪ್ರೇಮಾ ಮತ್ತು ಸಹಾಯಕಿ ರತ್ನ ಉಪಸ್ಥಿತರಿದ್ದರು.
ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಸಂಚಾಲಕ ಡಾ. ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯರಾದ ಸವಿತಾ ಯು. ದೇವಾಡಿಗ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಬಿ. ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಅಶ್ವಿತಾ ಜಿ.ಪೈ ವಂದಿಸಿದರು.











