ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಮತ್ತು ಉದ್ಯೋಗ ಆಧಾರಿತ ಶಿಕ್ಷಣ ಇಂದಿನ ವಿದ್ಯಾರ್ಥಿಗಳ ಅಗತ್ಯತೆಯಾಗಿದೆ. ಅದಕ್ಕೆ ಪೂರಕವಾಗಿ ಭಂಡಾರ್ಕಾರ್ಸ್ ಕಾಲೇಜು ಕೌಶಲ್ಯಾಭಿವೃದ್ಧಿ ಶಿಕ್ಷಣ ನೀಡುವತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಡಾ. ನಾರಾಯಣ ಸಭಾಹಿತ್ ಹೇಳಿದರು.

ಅವರು ಬುಧವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಮಣಿಪಾಲದ ಎಮ್.ಎಸ್.ಡಿ.ಸಿ. ಮತ್ತು ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ,ಕುಂದಾಪುರ ನಡುವಿನ “ತಿಳುವಳಿಕಾ ಒಪ್ಪಂದ (MOU)” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ, ಉದ್ಯೋಗ ಆಧಾರಿತ ಕೋರ್ಸ್ ಗಳು, ಕೌಶಲ್ಯ ಹೆಚ್ಚಿಸುವ ತರಬೇತಿ ಕಾರ್ಯಕ್ರಮಗಳನ್ನು ಮತ್ತು ಪದವಿ ಪೂರ್ವ ಕಾಲೇಜಿನಲ್ಲಿಯೂ ಉದ್ಯೋಗಾಧಾರಿತ ತರಬೇತಿ ನೀಡುವ ಯೋಜನೆ ಆರಂಭಿಸುವ ಚಿಂತನೆ ಇದೆ ಎಂದು ಹೇಳಿದರು.
ಮಣಿಪಾಲದ ಎಮ್.ಎಸ್.ಡಿ.ಸಿ. ಚೇರ್ಮನ್ ಬ್ರಿಗೇಡಿಯರ್ ಡಾ.ಸುರ್ಜಿತ್ ಸಿಂಗ್ ಪಾಬ್ಲಾ ಮಾತನಾಡಿ, ಈ ಒಪ್ಪಂದದ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳಿಗೆ ಪೂರಕವಾದ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕೋರ್ಸ್ಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. ವಿದ್ಯಾರ್ಥಿಗಳ ವೃತ್ತಿಪರ ಕೌಶಲ್ಯಗಳನ್ನು ಬೆಳೆಸುವ ಮೂಲಕ ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಈ ಸಹಭಾಗಿತ್ವ ಸಹಕಾರಿಯಾಗಲಿದೆ. ಅಲ್ಲದೇ ಭಾರತದ ಸ್ಪರ್ಧಾತ್ಮಕ ಪರೀಕ್ಷೆಗಳಾದ ಎನ್.ಡಿ.ಎ, ಭಾರತೀಯ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಿಗೆ ವಿಶೇಷ ಅರಿವು ಮತ್ತು ತರಬೇತಿಯನ್ನು ನೀಡುವ ಅವಶ್ಯಕತೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿ ಎಂ ಎಸ್ ಡಿ ಸಿಯ ರಿಜಿಸ್ಟ್ರಾರ್ ಡಾ.ಅಂಜಯ್ಯ ದೇವಿನೇನಿ ಮಾತನಾಡಿ ಎಮ್ ಎಸ್ ಡಿ ಸಿಯಲ್ಲಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದ ಯುವಕರಿಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳಿಗೆ ಇಂಟರ್ಶಿನ್ಶಿಪ್ ,ಪ್ರಾಜೆಕ್ಟ್ ಗಳು, ಇಂಡಸ್ಟ್ರಿಯಲ್ ಭೇಟಿಯನ್ನು ಸಹ ಆಯೋಜಿಸುತ್ತಿದೆ. ಅದರ ಸದುಪಯೋಗ ಪಡೆದುಕೊಳ್ಳಬೇಕು. ಅದರ ಕುರಿತು ಜನರಿಗೆ ವಿಶೇಷ ಮಾಹಿತಿ ಸಿಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯ ರಾಜೇಂದ್ರ ತೋಳಾರ್, ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ, ಎಮ್ ಎಸ್ ಡಿ ಸಿ ಯು ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ರಾಜಲಕ್ಷ್ಮಿ ಆನಂದನ್, ತರಬೇತುದಾರ ಅನನ್ಯ ಹೆಗ್ಡೆ ಉಪಸ್ಥಿತರಿದ್ದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಕಾಲೇಜಿನ ಸ್ಕಿಲ್ ಡೆವಲಪ್ಮೆಂಟ್ ಕಾರ್ಯಕ್ರಮ ಸಮಿತಿಯ ಸದಸ್ಯರಾದ ಪ್ರೊ ಅರುಣ್ ಎ.ಎಸ್. ವಂದಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಸ್ಕಿಲ್ ಡೆವಲಪ್ಮೆಂಟ್ ಕಾರ್ಯಕ್ರಮ ಸಮಿತಿಯ ಸಂಯೋಜಕರಾದ ನಿಶಾ.ಎಮ್, ಸದಸ್ಯರಾದ ಗಣೇಶ್.ಕೆ., ಸ್ನೇಹ. ಎಸ್, ಅರ್ಚನಾ ಅರವಿಂದ್, ಸುಮಲತಾ ಸುರೇಶ್, ಪ್ರವೀಣ್, ವಿದ್ಯಾರಾಣಿ, ಓಂಶ್ರೀ ರಿತಿನ್ ಮತ್ತು ಗಣೇಶ್ ಉಪಸ್ಥಿತರಿದ್ದರು.
















