ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಯುವ ರೆಡ್ ಕ್ರಾಸ್ ಘಟಕ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಇದರ ಅಧ್ಯಕ್ಷರಾದ ಡಾ. ಜಯಕರ ಶೆಟ್ಟಿ ಅವರು ಮಾತಾನಾಡಿ, ಪ್ರಥಮ ಚಿಕಿತ್ಸೆ ತರಬೇತಿಯು ಕೇವಲ ಆರೋಗ್ಯ ಚಿಕಿತ್ಸೆಗೆ ಸಂಬಂಧಿಸಿದ ವಿಷಯವಲ್ಲ್ಲ ಬದಲಾಗಿ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಜೀವನ ಕೌಶಲ್ಯವಾಗಿದೆ. ತುರ್ತು ಸಂದರ್ಭದಲ್ಲಿ ವ್ಯಕ್ತಿಗೆ ಸಮಯೋಜಿತವಾಗಿ ನೀಡುವ ಪ್ರಥಮ ಚಿಕಿತ್ಸೆ ವ್ಯಕ್ತಿಯ ಸ್ಥಿತಿಯನ್ನು ಹದಗೆಡದಂತೆ ನೋಡಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ತರಬೇತಿಯಲ್ಲಿ ಪಾಲ್ಗೊಂಡು ತುರ್ತು ಸಂದರ್ಭಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯ ಎಂದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಶಾನಿ ಮೆಡಿಕಲ್ ಸೆಂಟರ್ ಕುಂದಾಪುರ ಇದರ ವೈದ್ಯಾಧಿಕಾರಿ ಡಾ. ಸೋನಿ ಡಿ’ಕೋಸ್ತಾ ವಿದ್ಯಾರ್ಥಿಗಳಿಗೆ ಗಾಯಗೊಂಡ ವ್ಯಕ್ತಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ, ಸಣ್ಣಪುಟ್ಟ ಗಾಯಗಳಿಗೆ ಆರೈಕೆ, ರಕ್ತಸ್ರಾವ ನಿಯಂತ್ರಿಸುವ ವಿಧಾನ, ಸುಟ್ಟ ಗಾಯಗಳಿಗೆ ನೀಡಬೇಕಾದ ಪ್ರಾಥಮಿಕ ನೆರವು, ಮೂಛ ಅಥವಾ ಅಶ್ವಸ್ಥೆತೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಇಂಡಿಯನ್ ರೆಡ್ ಕ್ರಾಸ್ ಘಟಕದ ಸದಸ್ಯರುಗಳಾದ ಸತ್ಯ ನಾರಾಯಣ ಪುರಾಣಿಕ, ಶ್ರೀ ಶಿವರಾಮ್ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಮೋಹನ ಕೆ.ಎನ್, ಐ.ಕ್ಯೂ.ಎ.ಸಿ ಘಟಕದ ಸಂಯೋಜಕರಾದ ಸಂದೀಪ ಕೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕರಾದ ಮುರಳೀಧರ ಹೆಗ್ಡೆ ಸ್ವಾಗತಿದರು. ವಿದ್ಯಾರ್ಥಿನಿ ಮಾನಸ ಪ್ರಥಮ ಬಿ.ಎ ಕಾರ್ಯಕ್ರಮ ನಿರೂಪಿಸಿದರು. ಸಹ ಸಂಯೋಜಕಿ ಶ್ವೇತಾ ವಂದಿಸಿದರು.
















