ಗಂಗೊಳ್ಳಿ: ಮನುಷ್ಯನ ಆರೋಗ್ಯ ಉತ್ತಮವಾಗಿದ್ದರೆ ಜೀವನದಲ್ಲಿ ಸಾಧನೆ ಮಾಡಲು, ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ. ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದರ ಮೂಲಕ ಆರೋಗ್ಯ ಸಂರಕ್ಷಣೆಗೆ ಜನರು ಮುಂದಾಗಬೇಕು. ಇಂದಿನ ಯಾಂತ್ರಿಕ ಯುಗದಲ್ಲಿ ಜನರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎಚ್.ಗಣೇಶ ಕಾಮತ್ ಹೇಳಿದರು.
ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ ತಜ್ಞ ವೈದ್ಯರುಗಳ ನೇತೃತ್ವದಲ್ಲಿ ಗಂಗೊಳ್ಳಿಯ ಬಸ್ ನಿಲ್ದಾಣದ ಬಳಿಯಿರುವ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಬೃಹತ್ ಉಚಿತ ಹೃದೋಗ ತಪಾಸಣಾ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಪ್ರದೀಪ ಡಿ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸರಕಾರದ ಸುವರ್ಣ ಆರೋಗ್ಯ ಟ್ರಸ್ಟ್ನ ಜಿಲ್ಲಾ ವ್ಯವಸ್ಥಾಪಕ ಸಚ್ಚಿದಾನಂದ ಅವರು ಸರಕಾರದಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಪ್ರಸಿದ್ಧ ಹೃದಯರೋಗ ತಜ್ಞ ಡಾ.ನವೀನಚಂದ್ರ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು. ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ ರಾಮನಾಥ ಚಿತ್ತಾಲ್, ಮಣಿಪಾಲ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರುಗಳಾದ ಡಾ.ಕೇದಾರನಾಥ, ಡಾ.ಭರತ್ ಮೊದಲಾದವರು ಉಪಸ್ಥಿತರಿದ್ದರು.
ಪ್ರದೀಪ ಡಿ.ಕೆ. ಸ್ವಾಗತಿಸಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮ ನಿರೂಪಿಸಿದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ವಂದಿಸಿದರು. ರೋಟರಿ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಗಂಗೊಳ್ಳಿ, ಸುವರ್ಣ ಆರೋಗ್ಯ ಟ್ರಸ್ಟ್ ಬೆಂಗಳೂರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರಕಾರ ಮತ್ತು ಶ್ರೀ ರಾಘವೇಂದ್ರ ಸ್ಟೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಶಿಬಿರ ಆಯೋಜಿಸಲಾಗಿತ್ತು.