ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಚುನಾವಣಾ ಆಯೋಗವು ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಎಪ್ರಿಲ್ 23 ರಂದು ಮತದಾನ ನಡೆಸಲು ಚುನಾವಣಾ ವೇಳಾ ಪಟ್ಟಿಯನ್ನು ಘೋಷಿಸಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ, ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ, ಮತದಾನ ಪ್ರಾರಂಭವಾಗುವ ದಿನಾಂಕಕ್ಕೆ 48 ಗಂಟೆಗಳ ಮುಂಚಿತವಾಗಿ ಮತ್ತು ಮತದಾನದ ದಿನ ಅಂದರೆ ಎಪ್ರಿಲ್ 21 ರಂದು ಸಂಜೆ 6 ರಿಂದ ಎಪ್ರಿಲ್ 23 ರ ಮಧ್ಯರಾತ್ರಿ 12 ರ ವರೆಗೆ ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.
ಈ ಆದೇಶದಂತೆ ಸೂಚಿಸಿರುವ ದಿನಗಳಲ್ಲಿ, ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಯಾವುದೇ ಹೋಟೆಲ್ಗಳಲ್ಲಿ, ಕ್ಲಬ್ಗಳಲ್ಲಿ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ /ಸರಬರಾಜು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










