ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಹಕಾರಿ ಸಂಘದ ಎಲ್ಲಾ ಸದಸ್ಯರಿಗೂ ಮತದಾನದ ಅವಕಾಶ ದೊರೆತರೆ ಸಹಕಾರಿ ವ್ಯವಸ್ಥೆ ಉತ್ತುಂಗಕ್ಕೆ ತಲುಪುತ್ತದೆ. ಸಹಕಾರಿ ಸಂಘಗಳು ಪ್ರತಿ ಗ್ರಾಮದಲ್ಲಿಯೂ ತನ್ನ ಸೇವೆಯನ್ನು ವಿಸ್ತರಿಸಿದರೆ ರೈತರಿಗೆ ಮತ್ತಷ್ಟು ಅನುಕೂಲಕರವಾಗಲಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.
ಅವರು ಬುಧವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರುಗಳ ಸಂಯುಕ್ತ ಆಶ್ರಯದಲ್ಲಿ ಖಂಬದಕೋಣೆ ಕರ್ನಾಟಕ ಖಾವಿ ಯಾನೆ ಹರಿಕಾಂತ ಮಹಾಜನ ಸಭಾಂಗಣದಲ್ಲಿ ಜರುಗಿದ ೬೬ನೇ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭಕ್ಕೂ ಮುನ್ನ ಸಂಘದ ಖಂಬದಕೋಣೆ ಶಾಖೆಯಲ್ಲಿ ಆರಂಭಗೊಂಡ ರೈತಸಿರಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು.
ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ ಮಾತನಾಡಿ ಗದುಗಿನ ಸಿದ್ಧನಗೌಡರು, ಮೊಳಹಳ್ಳಿ ಶಿವರಾಯರು ಅವರಂತಹ ಸಹಕಾರ ಕ್ಷೇತ್ರಕ್ಕೆ ಭದ್ರ ಭುನಾದಿ ಹಾಕಿಕೊಟ್ಟದ್ದರಿಂದ ಇಂದು ಉತ್ತಮ ಸೇವೆ ಮಾಡಲು ಸಾಧ್ಯವಾಗಿದೆ. ಸಹಕಾರಿ ಕ್ಷೇತ್ರದ ಆಡಳಿತ ಕೆಲವರ ಕೈಯಲ್ಲಿರದೇ ಎಲ್ಲರೂ ಅದರಲ್ಲಿ ಒಳಗೊಳ್ಳಬೇಕು ಎಂಬ ಉದ್ದೇಶದಿಂದ ಸಹಕಾರಿ ಸಪ್ತಾಹವನ್ನು ಆಯೋಜಿಸಲಾಗುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಭಾರಿಗೆ ರೈತಸಿರಿ ಸೇವಾ ಕೇಂದ್ರ ಆರಂಭಿಸಿರುವುದು ಹಾಗೂ ರೈತರಿಗಾಗಿ ಸರ್ವ ಸರ್ವ ಸೌಲಭ್ಯಗಳುಳ್ಳ ಮಳಿಗೆ ತೆರೆಯುತ್ತಿರುವುದು ಉತ್ತಮ ಕಾರ್ಯವಾಗಿದ್ದು ಅದಕ್ಕೆ ಸಹಕಾರಿ ಮಹಾಮಂಡಲದ ಸಂಪೂರ್ಣ ಸಹಕಾರ ಇರಲಿದೆ ಎಂದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಸಂಘದ ನೂತನ ನಿವೇಶನವನ್ನು ರೈತಾರ್ಪಣೆ ಮಾಡಿದರು. ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಮಹೇಶ್ ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಕಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಸಹಕಾರ ಸಂಘಗಳ ಉಪನಿಬಂಧಕಿ ಚಂದ್ರಪ್ರತಿಮಾ ಎಂ. ಜೆ, ಟಿಎಪಿಸಿಎಂಎಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಖಂಬದಕೋಣೆ ರೈತರ ಸೇವಾ ಸಹಕಾರಿಯ ನಿರ್ದೇಶಕ ಬಿ.ಎಸ್. ಸುರೇಶ್ ಶೆಟ್ಟಿ, ಮೋಹನ ಪೂಜಾರಿ, ಗುರುರಾಜ ಹೆಬ್ಬಾರ್ ಹಾಗೂ ವಿವಿಧ ಸಹಕಾರಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.
ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ ತಂತ್ರಜ್ಞಾನ ಅಳವಡಿಕೆ ಮತ್ತು ಗಣಕೀಕರಣ ಎಂಬ ವಿಷಯವಾಗಿ ಎನ್. ಜಿ. ಗೋಪಾಲ್ ದಿಕ್ಸೂಚಿ ಭಾಷಣ ಮಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ವಾಮನ ಪೈ ವಂದಿಸಿದರು. ಶಿಕ್ಷಕ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಆಕಾಶವಾಣಿ ಕಲಾವಿದ ಗಣೇಶ್ ಗಂಗೊಳ್ಳಿ ಮತ್ತು ಬಳಗದಿಂದ ವೈವಿಧ್ಯಮಯ ಕಾರ್ಯಕ್ರಮ ಬಳಿಕ ಆಯ್ದ ಕಲಾವಿದರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಿತು.
















