ಶಂಕರನಾರಾಯಣ: ಎರಡು ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೊಳಗಾಗಿರುವ ಎಡಮೊಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಚಂದ್ರ ಕುಲಾಲ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶಂಕರನಾರಾಯಣ ಪೇಟೆಯಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಶಂಕರನಾರಾಯಣ ಕಾಲೇಜು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಹೊರನಡೆದು ಪ್ರತಿಭಟನಾ ಮೆರವಣಿಗೆ ನಡೆಸಿ ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿದರು.
ಎಬಿವಿಪಿ ಸಂಘಟನೆ, ಬಿಜೆಪಿ ಯುವಮೋರ್ಚಾ, ರಾಜ್ಯ ಕಾರ್ಮಿಕ ಘಟಕ ಮತ್ತು ವಿವಿಧ ಸಂಘಟನೆಗಳ ಸದಸ್ಯರು ಎಡಮೊಗೆ ಪಂಚಾಯತ್ ಎದುರು ಪ್ರತಿಭಟನೆ ನಡೆಸಿ ಬಾಲಚಂದ್ರ ಕುಲಾಲ್ನ ಪಂಚಾಯತ್ ಸದಸ್ಯತ್ವ ರದ್ದು ಮಾಡಿ ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಶಂಕರನಾರಾಯಾಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.