ಕುಂದಾಪುರ: ಕ್ರೀಡಾಕೂಟಗಳು ಸೌಹಾರ್ದತೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಂಡು ಕ್ರೀಡಾ ಸಾಮಾರ್ಥ್ಯವನ್ನು ಪ್ರದರ್ಶಿಸಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕ್ರೀಡಾ ಪ್ರಾಧಿಕಾರ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ರಾಜೀವ್ ಗಾಂಧಿ ಖೇಲ್ ಗ್ರಾಮೀಣ ಮತ್ತು ದಸರಾ ಕ್ರೀಡಾಕೂಟ 2015-16ನ್ನು ಕುಂದಾಪುರದ ಗಾಂಧಿ ಮೈದಾನದಲ್ಲಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಲೂಕು ಪಂಚಾಯತ್ ಅಧ್ಯಕ್ಷ ಭಾಸ್ಕರ ಬಿಲ್ಲವ ಮಾತನಾಡಿ, ಕ್ರೀಡಾಳುಗಳು ಕ್ರೀಡಾಮನೋಭಾವದಿಂದ ಆಡವಾಡಬೇಕು. ತೀರ್ಪುಗಾರರ ತೀರ್ಪಿಗೆ ಬದ್ಧರಾಗಿ, ಉನ್ನತ ಹಂತವನ್ನು ಪ್ರತಿನಿಧಿಸುವಂತಾಗಬೇಕು ಎಂದರು. ಪುರಸಭೆ ಅಧ್ಯಕ್ಷೆ ಕಲಾವತಿ ಯು.ಎಸ್., ಪುರಸಭಾ ಸದಸ್ಯ ಉದಯ ಮೆಂಡನ್, ರಾಜೇಶ ಕಾವೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ|ರೋಶನ್ ಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ವಡೇರಹೋಬಳಿ ಶಾಲೆಯ ಮುಖ್ಯ ಶಿಕ್ಷಕ ಸುಧಾಕರ ಶೆಟ್ಟಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಎಸ್. ದಿನಕರ ಹೆಗ್ಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೋಪಾಲ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ದೈ.ಶಿ.ಶಿಕ್ಷಕ ಚಂದ್ರಶೇಖರ ಬೀಜಾಡಿ ವಂದಿಸಿದರು. ಕ್ರೀಡಾಕೂಟದಲ್ಲಿ ಸುಮಾರು ೮೫೦ ಕ್ಕೂ ಹೆಚ್ಚು ಕ್ರೀಡಾಳುವಳು ಹೆಸರು ನೊಂಧಾಯಿಸಿಕೊಂಡರು.