ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ರಾಜ್ಯದಲ್ಲಿ 11 ಜಿಲ್ಲೆ ಹೊರತುಪಡಿಸಿ ಕೊವೀಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಅನ್ ಲಾಕ್, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.
ಜೂನ್ 14ರಿಂದ ಈ ನಿಯಮಗಳು ಜಾರಿಗೆ ಬರಲಿದ್ದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಗೆ ಅನ್ವಯವಾಗಲಿದೆ.
- ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಲಾಗಿದೆ.
- ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.
- ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ. ಕೋವಿಡ್ ಮಾರ್ಗಸೂಚಿ ಪಾಲಿಸಿ ಕೆಲಸ ಮಾಡಬೇಕು.
- ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ. ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ ಮಾಡಕೊಡಲಾಗಿದೆ.
- ಬಾರ್, ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ. ಮದ್ಯ ಮಳಿಗೆಗಳು ಮಧ್ಯಾಹ್ನ 2 ಗಂಟೆಯವರೆಗೆ ತೆರಯಬಹುದು.
- ಕೆಎಸ್ ಆರ್ ಟಿ ಸಿ, ಬಿಎಂಟಿಸಿ, ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ ಮುಂದುವರಿಸಲಾಗಿದೆ. ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ ನೀಡಲಾಗಿದೆ.
- ಈಗಾಗಲೇ ನಿಗದಿಯಾದ ಮದುವೆಗಳಲ್ಲಿ 40 ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ. ಅಂತ್ಯಕ್ರಿಯೆಯಲ್ಲಿ 5 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ರಾತ್ರಿ ಏಳರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿ ಹೊರತುಪಡಿಸಿ ಯಾರಿಗೂ ಸಂಚಾರಕ್ಕೆ ಅವಕಾಶವಿಲ್ಲ. ಈ ಅವಧಿಯಲ್ಲಿ ಕಾರ್ಖಾನೆಗಳು ಕೆಲಸ ನಿರ್ವಹಿಸಬಹುದು. ಕೆಲಸಗಾರರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು.
ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆ, ಹಾಲು, ತರಕಾರಿ, ಬೀದಿ ಬದಿ ವ್ಯಾಪಾರಸ್ಥರರು, ಮದ್ಯದಂಗಡಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹಂತ ಹಂತವಾಗಿ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳನ್ನು ಅನ್ ಲಾಕ್ ಮಾಡುವ ಬಗ್ಗೆ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು ಇಂದು ಮಾರ್ಗಸೂಚಿ ಹೊರಡಿಸಲಾಗಿದೆ.