ಕುಂದಾಪುರ: ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪತ್ನಿಯನ್ನು ಕೊಲೆಗೈದ ಪತಿ, ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

Call us

Click Here

ಸೊರಬದ ತಾಯಿಯ ಮನೆಯಲ್ಲಿ ವಾಸವಿದ್ದ ಪೂರ್ಣಿಮಾ, ಭಾನುವಾರ ಹೆಮ್ಮಾಡಿ ಸಮೀಪದ ಸಂಬಂಧಿಕರ ಸೀಮಂತ ಕಾರ್ಯಕ್ರಮಕ್ಕಾಗಿ ದೇವಲ್ಕುಂದಕ್ಕೆ ಬಂದಿದ್ದರು. ಪತಿ ಕರೆ ಮಾಡಿ ಮನೆಗೆ ಬರುವಂತೆ ಕೇಳಿಕೊಂಡಿದ್ದು, ಪೂರ್ಣಿಮಾ ಕಾರ್ಯಕ್ರಮ ಮುಗಿದ ಬಳಿಕ ಪತಿ ನೆಲೆಸಿದ್ದ ಬಾಡಿಗೆ ಮನೆಗೆ ತೆರಳಿ ತಮ್ಮತಾಯಿಗೆ ಮಾಹಿತಿ ನೀಡಿದ್ದರು. ರಾತ್ರಿ ಪತಿ ಪತ್ನಿ ಮಧ್ಯೆ ಜಗಳವಾಗಿ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಪೂರ್ಣಿಮಾರೊಂದಿಗೆ ವಿವಾಹವಾಗಿದ್ದರು. ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ರವಿ ಆಚಾರ್ಯ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆಯಲ್ಲಿ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.

ಭಾನುವಾರ ರಾತ್ರಿಯಿಂದ ಸೊರಬದಲ್ಲಿ ನೆಲೆಸಿರುವ ಮಕ್ಕಳು ತಾಯಿಗೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಅನುಮಾನಗೊಂಡ ಪೂರ್ಣಿಮಾ ಅವರ ತಾಯಿ ಹೆಮ್ಮಾಡಿಯಲ್ಲಿರುವ ತಮ್ಮ ಸಂಬಂಧಿಕರಿಗೆ ಕರೆ ಮಾಡಿ ಮನೆಗೆ ಹೋಗಿ ನೋಡಿ ಬರುವಂತೆ ತಿಳಿಸಿದ್ದರು. ಸಂಬಂಧಿಕರು ರಾತ್ರಿ ಹೋಗಿ ನೋಡಿದಾಗ ಲೈಟ್ ಆಫ್ ಇದ್ದ ಕಾರಣ ಮಲಗಿರಬಹುದು ಎಂದು ಅಂದಾಜಿಸಿ ವಾಪಾಸಾಗಿದ್ದರು. ಆದರೆ ಬೆಳಿಗ್ಗೆಯೂ ಕರೆ ಸ್ವೀಕರಿಸದ ಹಿನ್ನೆಲೆ ಮತ್ತೆ ಹೋಗಿ ನೋಡಿದಾಗ ಬಾಗಿಲು ಲಾಕ್ ಆಗಿತ್ತು. ಅನುಮಾನಗೊಂಡು ಕಿಟಕಿಯಿಂದ ನೋಡಿದಾಗ ಪೂರ್ಣಿಮಾ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಬಳಿಕ ಹೆಂಚು ತೆಗೆದು ಒಳಗೆ ಹೋಗಿ ನೋಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ, ಸಿಪಿಐ ಗೋಪಿಕೃಷ್ಣ, ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click here

Click here

Click here

Click Here

Call us

Call us

Leave a Reply