ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದು, ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಮಾರ್ಚ್ 12 ಮಂಗಳವಾರ ಸಂಜೆ 4 ಗಂಟೆಗೆ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ನಡೆಯುತ್ತಿರುವ ಈ ವಿದ್ಯಮಾನವು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಜೆಪಿ ಹೆಗ್ಡೆ ಆಗಲಿದ್ದಾರೆ ಎಂಬುದನ್ನು ಪುಷ್ಟಿಕರಿಸಿದೆ.
ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಜೆ.ಪಿ ಹೆಗ್ಡೆ ಅವರು, ಜನತಾದಳ ಸರಕಾರದಲ್ಲಿ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಭಾರತೀಯ ಜನತಾಪಕ್ಷಕ್ಕೆ ಸೇರ್ಪಡೆಗೊಂಡು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಸರಕಾರದ ಬಂದ ಬಳಿಕವೂ ಜಾತಿ ಗಣತಿ ವರದಿ ಸಲ್ಲಿಕೆಯ ಕಾರಣಕ್ಕೆ ಅವರ ಅಧ್ಯಕ್ಷ ಅವಧಿ ಮುಂದುವರಿದು, ಇತ್ತಿಚಿಗೆ ವರದಿ ಸಲ್ಲಿಕೆ ಮಾಡಿದ್ದರು.
ಜಾತಿ ಗಣತಿ ವರದಿ ಸಲ್ಲಿಸಿದ ಬೆನ್ನಲ್ಲೇ ಜೆಪಿ ಹೆಗ್ಡೆ ಅವರು ತಾನೂ ಟಿಕೆಟ್ ಆಕಾಂಕ್ಷಿ ಎಂಬುದನ್ನು ತಿಳಿಸಿದ್ದರು. ಕಳೆದೊಂದು ವರ್ಷದಿಂದ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಯೂ ಬಲವಾಗಿ ಹರಡಿತ್ತು. ಅಂತಿಮವಾಗಿ ಅವರು ಕಾಂಗ್ರೆಸ್ ಸೇರುತ್ತಿದ್ದು, ಟಿಕೆಟ್ ದೊರೆಯಲಿದೆಯೇ ಎಂಬ ಕುತೂಹಲ ಹುಟ್ಟುಹಾಕಿದೆ.