ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ನ.06: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಧೋರಣೆ ಖಂಡಿಸಿ ಕುಂದಾಪುರ ಮಂಡಲ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.

ಈ ವೇಳೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ವಕ್ಫ್ ನೋಟೀಸ್ ಮೂಲಕ ರೈತರಿಗೆ, ಸಾರ್ವಜನಿಕರಿಗೆ ಸಮಸ್ಯೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡು ರೈತರಿಗೆ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರಕಾರ ಒಂದೇ ಧರ್ಮದ ಪರವಾಗಿ ಕಾರ್ಯಾಚರಣೆ ಮಾಡುತ್ತಿದೆ. ರೈತರ ಕೃಷಿ ಭೂಮಿಯನ್ನು ವಕ್ಸ್ ಭೂಮಿ ಎಂದು ನೋಟಿಸ್ ಕೊಟ್ಟು ಕೃಷಿಕರನ್ನು ಅತಂತ್ರರನ್ನಾಗಿಸಿದೆ ಎಂದರು.
ಬಿಜೆಪಿ ಮುಖಂಡ ಬೈಕಾಡಿ ಸುಪ್ರಸಾದ ಶೆಟ್ಟಿ ಮಾತನಾಡಿ, ತುಷ್ಟಿಕರಣಕ್ಕಾಗಿ ರೈತರ, ಭೂಮಾಲಕರ, ಕುಂದಾಪುರ ದೇಹಾಲಯಗಳ, ಮಠ ಮಂದಿರಗಳ ಭೂಮಿಯನ್ನು ವಕ್ಸ್ ಭೂಮಿ ಎಂದು ಪಹಣಿಯಲ್ಲಿ ನಮೂದಿಸಿ ನೋಟಿಸ್ ನೀಡಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ನಿದರ್ಶನ ಎಂದರು.
ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಪ್ರಸ್ತಾವಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ.ಎಸ್., ಸತೀಶ್ ಪೂಜಾರಿ ವಕ್ವಾಡಿ, ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಮಂಡಲ ಮಾಜಿ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಮುಖಂಡರು ಭಾಗವಹಿಸಿದ್ದರು. ಶಾಸ್ತ್ರಿ ಸರ್ಕಲ್ನಿಂದ ತಾಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಲಾಯಿತು.


ಬೈಂದೂರಿನಲ್ಲಿ ಬಿಜೆಪಿ ಮಂಡಲದಿಂದ ಪ್ರತಿಭಟನೆ
ಬೈಂದೂರು: ಬೈಂದೂರು ಮಂಡಲ ಬಿಜೆಪಿ ವತಿಯಿಂದ ಮಂಗಳವಾರ ಬೈಂದೂರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಮ್ಮಕ್ಕು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪೋಷಣೆಯಿಂದ ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ನಡೆಸಲಾಗುತ್ತಿದೆ. ರೈತರಿಗೆ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಬಹುಸಂಖ್ಯಾತರ ನೋವಿನ ಪರಿಣಾಮವನ್ನು ರಾಜ್ಯ ಸರಕಾರ ಎದುರಿಸಬೇಕಾಗುತ್ತದೆ ಎಂದರು.
ಕೇಂದ್ರ ಸರಕಾರ ಈಗಾಗಲೇ ವಕ್ಫ್ ತಿದ್ದುಪಡಿ ವಿಧೇಯಕ ಜಾರಿಗೆ ಎಲ್ಲಾ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದ್ದು ಮುಂದಿನ ಅಧಿವೇಶನದಲ್ಲಿ ಮಂಡನೆ ಯಾಗುವ ಸಾಧ್ಯತೆಯು ಇದೆ. ತಿದ್ದುಪಡಿ ಮಸೂದೆ ಜಾರಿಯಾದರೆ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು
ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ರೈತರ ಜಮೀನು ಕಬಾಲಿಕೆ ಸೇರಿದಂತೆ ಪ್ರಮುಖ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯ ಅಧ್ಯಕ್ಷ ಬಿ. ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬೈಂದೂರಿನಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು
ಬಿಜೆಪಿ ಜಿಲ್ಲಾಧ್ಯಕ್ಷ ಬಿ. ಕಿಶೋರ್ ಕುಮಾರ್ ಕುಂದಾಪುರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸುರೇಶ್ ಬಟವಾಡಿ, ರೋಹಿತ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಮುಖರಾದ ಪ್ರಿಯದರ್ಶಿನಿ ಬೆಸ್ಕೂರು, ಮಂಡಲ ಕಾರ್ಯದರ್ಶಿಗಳಾದ ಮಹೇಂದ್ರ ಪೂಜಾರಿ, ಉಮೇಶ್ ಶೆಟ್ಟಿ ಕಲ್ಗದ್ದೆ, ಶರತ್ ಶೆಟ್ಟಿ ಉಪ್ಪುಂದ, ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಕೆ. ಆರ್., ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ, ಡಾ. ಅತುಲ್ ಕುಮಾರ್ ಶೆಟ್ಟಿ, ಶ್ಯಾಮಲ ಕುಂದರ್, ಭಾಗೀರಥ ಸುರೇಶ್ ಸಹಿತವಾಗಿ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.















