ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲೆಯಾದ್ಯಂತ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ (ಜೆಲ್ಲಿ , ಮರಳು, ಕಲ್ಲು) ಸರಿಯಾಗಿ ದೊರೆಯದ ಕಾರಣ ಕಟ್ಟಡ ನಿರ್ಮಾಣದ ಕಾರ್ಮಿಕರ ಕುಟುಂಬ ಬೀದಿಗೆ ಬರಬೇಕಾದ ಸ್ಥಿತಿ ಉಂಟಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷ ಗಿರೀಶ್ ಕುಂದಾಪುರ ಆಗ್ರಹಿಸಿದ್ದಾರೆ.
ಅವರು ಈ ಬಗ್ಗೆ ಮಂಗಳವಾರ ಕುಂದಾಪುರದ ಸಹಾಯಕ ಕಮಿಷನರ್ ಮಹೇಶ್ ಚಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಪ್ರತಿ ವರ್ಷವೂ ಇದೆ ಸಮಸ್ಯೆ ಎದುರಾಗುತ್ತಿದೆ. ಅವೈಜ್ಞಾನಿಕವಾದ ಕಾನೂನು ತೊಡಕುಗಳನ್ನು ಸರಿಪಡಿಸಿ ಪರಿಹಾರ ಒದಗಿಸಬೇಕು. ಇಲ್ಲದಿದ್ದರೆ ಜಿಲ್ಲೆಯಾದ್ಯಂತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಸಂಘಟನೆ ವತಿಯಿಂದ ಉಗ್ರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ, ಜಿಲ್ಲಾ ಕಟ್ಟಡ ಕಾರ್ಮಿಕ ಸಂಘಟನಾ ಕಾರ್ಯದರ್ಶಿ ಸತೀಶ್ ಕೆ.ಟಿ., ಜಿಲ್ಲಾ ಕಟ್ಟಡ ಕಾರ್ಮಿಕ ಕೋಶಧಿಕಾರಿ ಸುರೇಶ್ ಪುತ್ರನ್, ಪ್ರಮುಖರಾದ ಕೃಷ್ಣಮೂರ್ತಿ ಯು, ಅನಿಲ್, ಪ್ರವೀಣ್, ಕೇಶವ ಟಿಟಿ ರಸ್ತೆ, ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.










