ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅತ್ಯಂತ ಹಿಂದುಳಿದ ಪ್ರದೇಶವಾದ ಸೌಪರ್ಣಿಕಾ ನದಿಯ ತಟದ ಬಂಟ್ವಾಡಿಯಲ್ಲಿ ಪ್ರಾರಂಭಗೊಂಡ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಕಳೆದ 75 ವರ್ಷಗಳಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದರೂ ಬಹಳಷ್ಟು ಅಭಿವೃದ್ಧಿ ಹೊಂದಿದೆ. ಸರಕಾರದಿಂದ ಬರುತ್ತಿರುವ ಅನುದಾನ ಹಾಗೂ ಶಿಕ್ಷಕರ ನೇಮಕಾತಿ ಸ್ಥಗಿತಗೊಂಡಿರುವುದರಿಂದ ಶಾಲೆಯ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಗೌರವ ಶಿಕ್ಷಕಿಯರನ್ನು ನೇಮಕ ಮಾಡಿಕೊಂಡು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ಪ್ರಯತ್ನ ನಡೆದಿದೆ ಎಂದು ಶಾಲೆಯ ಸಂಚಾಲಕ, ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ಅರುಣ್ ಕುಮಾರ್ ಶೆಟ್ಟಿ ಹೇಳಿದರು.
ಸೇನಾಪುರ ಗ್ರಾಮದ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡಿದರು.
ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶ್ಯಾನುಭಾಗ್, ಸಿಆರ್ಪಿ ಸತೀಶ್ ಶೆಟ್ಟಿ, ಉದ್ಯಮಿಗಳಾದ ಅಜಿತ್ ಪ್ರಸಾದ್ ಶೆಟ್ಟಿ ಬೆಂಗಳೂರು, ಚಿತ್ತರಂಜನ್ ಹೆಗ್ಡೆ ಹರ್ಕೂರು, ಶಿಕ್ಷಕ-ರಕ್ಷಕ ಸಮಿತಿ ಅಧ್ಯಕ್ಷೆ ಜಯಲಕ್ಷ್ಮೀ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರಸಿಂಹ ಮೊಗವೀರ ಬಂಟ್ವಾಡಿ ಮೊದಲಾದವರು ಉಪಸ್ಥಿತರಿದ್ದರು. ಶಾಲೆಯ ಪ್ರಾಕ್ತನ ವಿದ್ಯಾರ್ಥಿ ಆದರ್ಶ ದೇವಾಡಿಗ ಸ್ವಸ್ತಿವಾಚನ ಗೈದರು.

ಇದೇ ಸಂದರ್ಭ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗುರುವಂದನಾ ಕಾರ್ಯಕ್ರಮದಲ್ಲಿ ವಿಶಿಷ್ಟ ರೀತಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು. ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುತ್ತಿರುವ ಐರಬೈಲು ಆನಂದ ಶೆಟ್ಟಿ ಮತ್ತು ಹೆಮ್ಮಾಡಿ ಪ್ರಭಾಕರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ನಮ್ಮ ಶಾಲೆ ನಮ್ಮ ಹೆಮ್ಮೆ ಅಭಿಯಾನದಲ್ಲಿ ಕೈಜೋಡಿಸಿದ ವಿದ್ಯಾಭಿಮಾನಿಗಳನ್ನು ಗೌರವಿಸಲಾಯಿತು.
ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು. ಶಾಲೆಯ ಮುಖ್ಯಶಿಕ್ಷಕ ಶ್ರೀಧರ ಆಚಾರ್ಯ ವರದಿ ವಾಚಿಸಿದರು. ಶಂಭು ಗುಡ್ಡಮ್ಮಾಡಿ ಸನ್ಮಾನಿತರನ್ನು ಪರಿಚಯಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ನಾಗೇಶ ಶ್ಯಾನುಭಾಗ್ ಕಾರ್ಯಕ್ರಮ ನಿರ್ವಹಿಸಿದರು.















