ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85 ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದ್ದು, ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಗತಿ ಆಗಿರುವುದಿಲ್ಲ.
ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿದ್ದು, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಸ್ವಗ್ರಾಮಕ್ಕೆ ಬಂದ ಕೂಡಲೇ ಅಥವಾ ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಿಸಬೇಕು. ಸದ್ರಿ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಸೈಬರ್, ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ.
ಆದ್ದರಿಂದ, ಈವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ಮುಂದಿನ ದಿನಗಳಲ್ಲಿ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.