ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ, ಬೈಂದೂರು ಹಾಗೂ ಕೊಲ್ಲೂರಿಗೆ ಗುರುವಾರ ಸಂಜೆ ಭೇಟಿ ನೀಡಿದರು.
ಈ ವೇಳೆ ಅವರು ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ ಸಮುದ್ರ ದಡದಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ನಡುವೆ ರಸ್ತೆ ಹಾದು ಹೋಗಿದ್ದು ಇದೊಂದು ಅದ್ಭುತ ಪ್ರದೇಶವಾಗಿದೆ. ಸೋಮೇಶ್ವರವೂ ಸುಂದರ ಪ್ರದೇಶವಾಗಿದೆ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯ ಕ್ರಮ ವಹಿಸಲಾಗುವುದು. ಸಂಸದ ರಾಘವೇಂದ್ರ ಅವರ ಕ್ಷೇತ್ರದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯ ವಿಶೇಷ ಕಾಳಜಿಯ ಮೇರೆಗೆ ಮಾಡಿಕೊಂಡಿದ್ದ ಮನವಿಯ ಹಿನ್ನೆಲೆಯಲ್ಲಿ ಭೇಟಿ ನೀಡಿರುವುದಾಗಿ ತಿಳಿಸಿದರು.


ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಬೈಂದೂರು ಕ್ಷೇತ್ರದ ಕೊಲ್ಲೂರು ಕ್ಷೇತ್ರದ ಅಭಿವೃದ್ಧಿಯ ಕುರಿತು ಕಳೆದ ಅಧಿವೇಶನದ ಸಮಯದಲ್ಲಿ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ ಮಾಡಲಾಗಿತ್ತು. “ಸಾಸಿ” (special assistance for the state for capital investment) ಎನ್ನುವ ಯೋಜನೆಯಡಿ ಪಡುವರಿ – ಸೋಮೇಶ್ವರ, ಮರವಂತೆ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬೇಡಿಕೆಯಿಟ್ಟು ಪ್ರಸ್ತಾವನೆ ಕಳಿಸಲಾಗಿತ್ತು. ಇದರ ಫಲಪ್ರದ ಎಂಬಂತೆ ಸಚಿವರು ಇಂದು ಈ ಮೂರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಸಕಾರಾತ್ಮಕ ಸ್ಪಂದನೆ ನಿರೀಕ್ಷೆಯಿದೆ.

ಸಚಿವರ ಈ ಒಂದು ವಿಶೇಷ ಭೇಟಿಯಿಂದ ಕೇಂದ್ರದಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುದಾನ ದೊರೆತು ಭವಿಷ್ಯದಲ್ಲಿ ರೂಪಿಸಿರುವ ಅನೇಕ ಯೋಜನೆಗಳು ಸಕಾರಾಗೊಳ್ಳುವ ಕನಸು ನನಸಾಗುವ ಹೊಸ ಆಶಾಭಾವ ಮೂಡಿದೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ರೂಪುಗೊಳ್ಳುವ ಭರವಸೆ ಮೂಡಿದೆ ಎಂದರು.
ಇದೇ ವೇಳೆಯಲ್ಲಿ ಕೇಂದ್ರ ಸಚಿವರು ಮರವಂತೆಯಲ್ಲಿ ಕೆಲ ತಿಂಗಳ ಹಿಂದೆ ಶುಭಾರಂಭಗೊಂಡ “ಸ್ಕೈ ಡೈನಿಂಗ್” ವಿಶೇಷ ಹೋಟೆಲ್ ವೀಕ್ಷಣೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಅವರನ್ನು ಗೌರವಪೂಋವಕವಾಗಿ ಸ್ವಾಗತಿಸಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾಧಿಕಾರಿಗಳಾದ ಡಾ. ವಿದ್ಯಾಕುಮಾರಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮೀ ಅವರು, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಪ್ರಮುಖರಾದ ವೆಂಕಟೇಶ್ ಕಿಣಿ, ಬಿ.ಎಸ್. ಸುರೇಶ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಛೇರಿಯಲ್ಲಿ ಜರುಗಿದ ಸಭೆಯಲ್ಲಿ ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.