ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಶಿರೂರಿನ ಗ್ರೀನ್ ವ್ಯಾಲಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ನಡೆದಿದೆ ಎನ್ನಲಾದ ಹಲ್ಲೆಯಾದ ವೀಡಿಯೋ ವೈರಲ್ ಆಗಿರುವ ಕುರಿತಂತೆ ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಪದಾಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಎಸ್ ಯು ಐ ಪದಾಧಿಕಾರಿಗಳು ಪ್ರಾಂಶುಪಾಲರನ್ನು ಭೇಟಿ ಮಾಡಿ ಘಟನೆಯ ಕುರಿತಂತೆ ಮಾಹಿತಿಯನ್ನು ಪಡೆದುಕೊಂಡರು. ಅಲ್ಲದೆ ಮುಂದೆ ಅವನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ನಿಯೋಗ ಕಾಲೇಜು ಆಡಳಿತ ಮಂಡಳಿಗೆ ಆಗ್ರಹಿಸಿತು. ಮುಂದೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಕಾಲೇಜಿನ ವಿರುದ್ಧ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಲೆಯ ಪ್ರಾಂಶುಪಾಲರು ಇದಕ್ಕೆ ಪ್ರತಿಕ್ರಿಯಿಸಿ, ಘಟನೆ ಆರು ತಿಂಗಳ ಹಿಂದೆ ನಡೆದಿದ್ದು ಇತ್ತಿಚೇಗೆ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ನಡೆದ ಕೂಡಲೇ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದ ಉಪನ್ಯಾಸಕ ವಿನಾಯಕ್ ಖಾರ್ವಿ ಎಂಬಾತನನ್ನು ಸಂಸ್ಥೆಯಿಂದ ವಜಾಗೊಳಿಸಿದ್ದು ವಿದ್ಯಾರ್ಥಿಯ ಕುಟುಂಬಕ್ಕೆ ಈ ಕುರಿತು ಮಾಹಿತಿ ಕೂಡ ನೀಡಲಾಗಿದೆ. ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬೆನ್ನಲ್ಲೇ ಮಾನವ ಹಕ್ಕು ಆಯೋಗ ಕೂಡ ಸಂಸ್ಥೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ ಮತ್ತು ಎಚ್ಚರಿಕೆಯನ್ನು ನೀಡಿದೆ ಎಂದು ಪ್ರಾಂಶುಪಾಲರು ತಿಳಿಸಿದರು.
ಈ ವೇಳೆ ಎನ್.ಎಸ್.ಯು.ಐ ಜಿಲ್ಲಾ ಅಧ್ಯಕ್ಷ ಸೌರಭ್ ಬಲ್ಲಾಳ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಶ್ ಪೂಜಾರಿ, ಬೈಂದೂರು ತಾಲೂಕು ಅಧ್ಯಕ್ಷರಾದ ದಿಲೀಪ್ ಕುಮಾರ್ , ಕುಂದಾಪುರ ತಾಲೂಕು ಅಧ್ಯಕ್ಷರಾದ ಸುಜನ್ ಶೆಟ್ಟಿ, ಪದಾಧಿಕಾರಿಗಳಾದ ಸಿರಾಜ್ ಶೇಖ್ ಮತ್ತು ಸುಮುಖ್ ಶೇರಿಗಾರ್ ಉಪಸ್ಥಿತರಿದ್ದರು.










