ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು.
ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಹರಿಶ್ಚಂದ್ರ ನಾಮಫಲಕವನ್ನು ಅನಾವರಣಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಪತ್ರಕರ್ತರು ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಕಾಲಕಾಲಕ್ಕೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡುವುದು ಅತೀ ಅಗತ್ಯವಾಗಿದೆ. ಅದೇ ರೀತಿ ಪ್ರಥಮ ಚಿಕಿತ್ಸೆಯ ಕುರಿತು ಕೂಡ ಪತ್ರಕರ್ತರಿಗೆ ತರಬೇತಿ ನೀಡುವುದು ಮುಖ್ಯ. ಇದಕ್ಕೆಲ್ಲ ನಮ್ಮ ಸಂಸ್ಥೆಯಿಂದ ಸಹಕಾರ ನೀಡ ಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆಯ ವತಿಯಿಂದ ಭಾರತೀಯ ಸೇನೆಗೆ ನೀಡಲಾದ 55,555ರೂ. ಮೊತ್ತದ ದೇಣಿಗೆಯ ಚೆಕ್ನ್ನು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಅವರ ಮೂಲಕ ಉಡುಪಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ, ಉಡುಪಿ ಕರಾವಳಿ ಐಎಂಎ ಅಧ್ಯಕ್ಷ ಡಾ. ಸುರೇಶ್ ಶೆಣೈ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯ ಉಪಸ್ಥಿತರಿದ್ದರು.
ಪತ್ರಕರ್ತ ಜನಾರ್ದನ ಕೊಡವೂರು ನಿರೂಪಿಸಿ, ಸ್ವಾಗತಿಸಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು.
ಸೂಚನಾ ಫಲಕದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಕಚೇರಿ, ಉಡುಪಿ ಪತ್ರಿಕಾ ಭವನ (ಪ್ರೆಸ್ಕ್ಲಬ್), ಐಎಂಎ ಭವನ, ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಹೋಗುವ ಮಾರ್ಗಯನ್ನು ಸೂಚಿಸಲಾಗಿದೆ.