ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಮೇ.26: ಇಲ್ಲಿನ ಖಾರ್ವಿಕೇರಿ ನಿವಾಸಿ, ಶ್ರೀ ಮಹಾಕಾಳಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಜಯಾನಂದ ಖಾರ್ವಿ (64) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದ ಜಯಾನಂದ ಖಾರ್ವಿ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಕೊಂಕಣಿ ಖಾರ್ವಿ ಸಮಾಜದ ಪ್ರತಿಷ್ಠಿತ ಶ್ರೀ ಮಹಾಕಾಳಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು ಕುಂದೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ನಂದಿಕೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.
ಕುಂದಾಪುರ ಕೊಂಕಣಿ ಖಾರ್ವಿ ಸಮಾಜದ ಹೋಳಿ ಹಬ್ಬದ ಸಂದರ್ಭದಲ್ಲಿ ಶ್ರೀ ಮಹಾಕಾಳಿ ಮಾತೆಯ ಬಣ್ಣದ ಪೂಜೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ವಿಧಾನವನ್ನು ಆಳವಡಿಸಿ ಇತರೆ ಸಮಾಜಕ್ಕೆ ಖಾರ್ವಿ ಸಮುದಾಯದ ಸಂಸ್ಕೃತಿಯನ್ನು ಪರಿಚಯಿಸಿದ ಜಯಾನಂದ ಖಾರ್ವಿ ಕೊಂಕಣಿ ಖಾರ್ವಿ ಸಮಾಜದ ಆಗುಹೋಗುಗಳಿಗೆ ಜೊತೆಯಾಗಿದ್ದರು. ಕುಂದಾಪುರ ಭಂಡಾರಕಾರ್ಸ್ ಕಾಲೇಜುನಲ್ಲಿ ಪದವಿ ಪಡೆದಿದ್ದ ಅವರು ವಾಲಿಬಾಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ವಿದ್ಯಾರಂಗ ಮಿತ್ರ ಮಂಡಳಿ(ರಿ), ವಿದ್ಯಾನಿಧಿ ಯೋಜನೆಯ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ವಿದ್ಯಾರ್ಥಿಗಳಿಗೆ ವಿನೂತನವಾದ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಮೃತರ ಪತ್ನಿ ಶಾರದಾ ಪುತ್ರರಾದ ಭರತ್ ನಿಶಾನ್, ಪುತ್ರಿ ನಿಹಾರಿಕಾಳ ಹಾಗೂ ಬಂಧುಗಳನ್ನು ಅಗಲಿದ್ದಾರೆ.















