ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿಕ್ಷಣ ಸಂಸ್ಥೆಯೊಂದಕ್ಕೆ ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಆಡಳಿತ ಮಂಡಳಿಗಳು ಆಧಾರ ಸ್ಥಂಭವಾಗಿದ್ದು ಈ ಮೂರರ ನಡುವೆ ಸೇತುವೆಯಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯನಿರ್ವಹಿಸಬೇಕು. ಈ ಸಮಿತಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದಷ್ಟು ಶೈಕ್ಷಣಿಕ ಸಂಸ್ಥೆ ಸೃಜನಶೀಲವಾಗಿರುತ್ತದೆ ಎಂದು ಬೆಹರಿನ್ ಕಿಂಗ್ಡಮ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಡಾ. ಇಕ್ಬಾಲ್ ಹವಾಲ್ದಾರ್ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ 2025-26ನೇ ಶೈಕ್ಷಣಿಕ ಕಾರ್ಯಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ನೂತನ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ ಪ್ರತಿಜ್ಞಾ ವಿಧಿ ಪೂರೈಸಿದರು. ಎಸ್ಕ್ಯೂಎಸಿ ಪ್ರತಿನಿಧಿ ನಿರೀಕ್ಷಾ ಶೆಟ್ಟಿ ವಾರ್ಷಿಕ ಚಟುವಟಿಕೆಯ ಪಟ್ಟಿ ವಾಚಿಸಿದರು. ವಿದ್ಯಾರ್ಥಿಗಳಾದ ಐಶ್ವರ್ಯ ಅತಿಥಿಗಳನ್ನು ಪರಿಚಯಿಸಿದರು. ಶ್ರೀರಕ್ಷಾ ನಿರೂಪಿಸಿ, ಮಿಥಿಲೇಶ್ ಸ್ವಾಗತಿಸಿ, ಅನುಶ್ರೀ ಕೆ. ಶೆಟ್ಟಿ ವಂದಿಸಿದರು.










