ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳು ಪಾಠ – ಪ್ರವಚನದ ಜೊತೆಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದ್ದು, ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಕೂಡ ಇದು ಸಹಾಯಕವಾಗುತ್ತದೆ ಎಂದು ಬೆಂಗಳೂರು ಮೆಂಟರ್ಸ್ ಫಾರ್ ಕಿಡ್ಸ್ ಫೌಂಡೇಶನ್ಸ್ನ ಅರ್ಪಣಾ ಭಟ್ ಹೇಳಿದರು.
ಅವರು ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಮೆಂಟರ್ಸ್ ಫಾರ್ ಕಿಡ್ಸ್ ಫೌಂಡೇಶನ್, ಬೆಂಗಳೂರು ಇವರ ಸಂಯುಕ್ತಾಶ್ರಯದೊಂದಿಗೆ ಉನ್ನತ ಕೌಶಲ್ಯದ ಕುರಿತು ನಡೆದ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಕೌಶಲ್ಯವು ಯುವ ಸಬಲೀಕರಣಕ್ಕೆ ನಾಂದಿಯಾಗಲಿದೆ. ಸಾಮಾನ್ಯರಿಂದ ವಿಶೇಷವಾಗಿ ಗುರುತಿಸಿಕೊಳ್ಳಲು ವಿದ್ಯಾರ್ಥಿಗಳು ನಿರಂತರ ಪ್ರಯತ್ನವನ್ನು ಮಾಡುತ್ತಲೇ ಇರಬೇಕು. ಹಾಗೂ ವಿವಿಧ ಸರ್ಟಿಫಿಕೇಟ್ ಪ್ರೋಗ್ರಾಂಗಳಲ್ಲಿ ಭಾಗವಹಿಸುವುದರ ಮೂಲಕ ಉದ್ಯೋಗ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಇದು ಉದ್ಯಮದ ಅಗತ್ಯವನ್ನು ಪೂರೈಸುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ಮೆಂಟರ್ಸ್ ಫಾರ್ ಕಿಡ್ಸ್ ಫೌಂಡೇಶನ್ ಈ ಸಂಸ್ಥೆಯು ವಿವಿಧ ಸರ್ಟಿಫಿಕೇಟ್ ಪ್ರೋಗ್ರಾಂಗಳನ್ನು ಉಚಿತವಾಗಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಈ ಅವಕಾಶದ ಸದ್ಬಳಕೆಯನ್ನು ಮಾಡಿಕೊಳ್ಳಬೇಕೆಂದು ತಿಳಿಸಿದರು.
ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು, ಉದ್ಯೋಗ ಮತ್ತು ಮಾಹಿತಿ ಕೋಶದ ಸಂಚಾಲಕರಾದ ಮನೋಹರ್ ಬಿ., ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ವಿದ್ಯಾ ಅವರು ಉಪಸ್ಥಿತರಿದ್ದರು.















