ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳು ಪಠ್ಯಕ್ರಮದ ಚೌಕಟ್ಟಿಗೆ ಸೀಮಿತರಾಗದೆ, ಮೂಲ ವಿಜ್ಞಾನದಲ್ಲಿ ಲಭ್ಯವಿರುವ ವಿವಿಧ ಸಂಶೋಧನಾ ಅವಕಾಶಗಳಿಗೆ ಸಿದ್ಧರಾಗುತ್ತಾರೆ. ಶೀಘ್ರವಾಗಿ ಬದಲಾಗುತ್ತಿರುವ ವಿಜ್ಞಾನ ಲೋಕಕ್ಕೆ ತಮ್ಮನ್ನು ತಾವು ತೆರೆದುಕೊಳ್ಳುವತ್ತ ಯೋಚಿಸಬೇಕು. ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಸ್ವಅಧ್ಯಯನಕ್ಕೆ ಮೀಸಲಿಡಬೇಕು ಎಂದು ಚೈನೀಸ್ ಅಕಾಡೆಮಿ ಆಫ್ ಸೈನ್ಸಸ್ ಬೀಜಿಂಗ್ ಇಲ್ಲಿ ಪೋಸ್ಟ್ ಡಾಕ್ಟರೇಟ್ ಫೆಲೋ ಆಗಿರುವ ಡಾ. ಕೃಷ್ಣ ಯಮನಪ್ಪ ಪೂಜಾರಿ ಹೇಳಿದರು.
ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಪದವಿ ನಂತರದ ಸಂಶೋಧನಾ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಕರ ಬಿ., ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಂಜಿತ್ ಉಪಸ್ಥಿತರಿದ್ದರು.
ವಿಜ್ಞಾನ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು. ಕಾರ್ಯಕ್ರಮವನ್ನು ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ಅಕ್ಷತಾ ನಿರೂಪಿಸಿ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅನುಷಾ ಎಲ್. ಸ್ವಾಗತಿಸಿ, ರಂಜಿತ್ ವಂದಿಸಿದರು.















