ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಚಲಿಸುತ್ತಿದ್ದ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಲ್ಲಿನ ಉದ್ಲಾಡಿ ತೆಂಕಬೆಟ್ಟು ಬಸ್ ಸ್ಟ್ಯಾಂಡ್ ಬಳಿ ಮಂಗಳವಾರ ಸಂಭವಿಸಿದೆ.
ಜೂನ್.2ರಂದು ಬೆಳಗ್ಗೆ ಸುಮಾರು 8:15ರ ವೇಳೆಗೆ ಸಾಹೇಬ್ರಕಟ್ಟೆಯಿಂದ ಕೋಟ ಮೂರುಕೈ ರಸ್ತೆಯ ಬಸ್ ಸ್ಟ್ಯಾಂಡ್ ಬಳಿ ನಂದನ್ ಎಂಬುವವರು ತಮ್ಮ ಬೈಕ್ ನಲ್ಲಿ ಬನ್ನಾಡಿ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಕೋಟ ಮೂರುಕೈ-ಸಾಹೇಬ್ರಕಟ್ಟೆ ರಸ್ತೆಯಲ್ಲಿ ಹಿಂದಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಅಪರಿಚಿತ ವಾಹನವೊಂದು ನಂದನ್ ಅವರ ಬೈಕ್ಗೆ ಜೋರಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ನಂದನ್ ಅವರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದಿದ್ದು, ಹೊಟ್ಟೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಅಪಘಾತವೆಸಗಿದ ವಾಹನದ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ನಂದನ್ ಅವರನ್ನು ತಕ್ಷಣವೇ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಹಾಗೂ ಪರಾರಿಯಾದ ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.










