ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇಹ ಮತ್ತು ಮನಸ್ಸನ್ನು ಕೂಡಿಸಿ ವ್ಯಕ್ತಿತ್ವವನ್ನು ಅರಳಿಸುವ ಯೋಗವು ಭಾರತದ ಪತಂಜಲಿ ಮಹರ್ಷಿಗಳ ಮಹಾನ್ ಕೊಡುಗೆ, ವಿಶ್ವದಾದ್ಯಂತ ಯೋಗವನ್ನು ಜೀವನದ ಒಂದು ಭಾಗವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್. ಶೋಭಾ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವಿದ್ಯಾರ್ಥಿಗಳು ನಿತ್ಯವೂ ಯೋಗವನ್ನು ಅಭ್ಯಾಸ ಮಾಡಿದರೆ ಸಕಾರಾತ್ಮಕ ಯೋಚನೆ ಬೆಳೆದು ಭವಿಷ್ಯ ಉಜ್ವಲವಾಗುತ್ತದೆ ಎಂದು ನುಡಿದರು.
ದೈಹಿಕ ಶಿಕ್ಷಣ ಶಿಕ್ಷಕಿ ರತ್ನಾ ಯೋಗದ ಮಹತ್ವವನ್ನು ಹೇಳುತ್ತಾ ವಿದ್ಯಾರ್ಥಿಗಳಿಂದ ಧ್ಯಾನ, ಪ್ರಾಣಾಯಾಮ, ಸೂರ್ಯ ನಮಸ್ಕಾರ ಹಾಗೂ ವಿವಿಧ ಯೋಗಾಸನಗಳನ್ನು ಮಾಡಿಸಿದರು.
ಸಮೂಹ ಸಂಪನ್ಮೂಲ ವ್ಯಕ್ತಿ ಸುಚಿತ್ರಾ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ರಮೇಶ ಕುಲಾಲ್ ಎನ್. ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ರತ್ನಾ ಕೃತಜ್ಞತೆ ಸಲ್ಲಿಸಿದರು.

















