ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರಿನಲ್ಲಿ ಗುರುವಾರ ನಡೆದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹರಡುವಿಕೆ ಹಾಗೂ ನಿಯಂತ್ರಣ ಕ್ರಮಗಳು ಕುರಿತು ನಡೆದ ಸಭೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ರಾಜ್ಯದ ಆರೋಗ್ಯ ಸಚಿವರಾದ ಯು. ಟಿ ಖಾದರ್ ಅವರಿಗೆ ತಾಲೂಕು ಆಸ್ಪತ್ರೆಯ ಅವಶ್ಯಕತೆ ಮನವರಿಕೆ ಮಾಡಿ ನೂರು ಹಾಸಿಗೆಗಳ ತಾಲೂಕು ಆಸ್ಪತ್ರೆ ಮಂಜೂರು ಮಾಡಲು ಮನವಿ ಮಾಡಿದರು.

ತಾಲೂಕು ಆಸ್ಪತ್ರೆ ಉದ್ದೇಶಕ್ಕಾಗಿ ಈಗಾಗಲೇ ಜಾಗ ಕಾದಿರಿಸಿ ಈ ಹಿಂದಿನ ಆರೋಗ್ಯ ಸಚಿವರು ಇಲಾಖಾ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಆಗದ ಕ್ರಮಗಳು ಮತ್ತು ಬೈಂದೂರು ತಾಲೂಕಿನಲ್ಲಿ ಆಸ್ಪತ್ರೆಯ ಅಗತ್ಯತೆಯನ್ನು ಅವರು ಸಚಿವರಿಗೆ ಮನವರಿಕೆ ಮಾಡಿದ್ದರು.
ಎಂಡೊಸಲ್ಫಾನ್ ಪುನರ್ವಸತಿ ಕೇಂದ್ರ ಮಂಜೂರು ಮಾಡಲು ಕೋರಿಕೆ:
ಉಡುಪಿ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಮಂದಿ ಎಂಡೊಸಲ್ಫಾನ್ ಪೀಡಿತರಿದ್ದು ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಧಿತರು ಇರುವ ಕಾರಣ ಬೈಂದೂರು ತಾಲೂಕು ಸೇನಾಪುರ ಗ್ರಾಮದಲ್ಲಿ ಪುನರ್ವಸತಿ ಕೇಂದ್ರ ನಿರ್ಮಾಣ ಮಾಡಲು ಈಗಾಗಲೇ 5 ಎಕರೆ ಜಾಗವನ್ನು ಆರೋಗ್ಯ ಇಲಾಖೆಯ ಹೆಸರಿಗೆ ಕಾಯ್ದಿರಿಸಲಾಗಿದ್ದು ಅಲ್ಲಿ ಜಿಲ್ಲಾ ಮಟ್ಟದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರವನ್ನು ಮಂಜೂರು ಮಾಡಲು ಆರೋಗ್ಯ ಸಚಿವರಿಗೆ ಮನವಿ ಮಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಮನವಿ:
ಬೈಂದೂರು ಕ್ಷೇತ್ರದಲ್ಲಿನ ಸಾರ್ವಜನಿಕರ ಆರೋಗ್ಯ ಸುಧಾರಣೆ ದೃಷ್ಟಿಯಿಂದ ಸಿದ್ಧಾಪುರ, ವಂಡ್ಸೆ, ಕಿರೀಮಂಜೇಶ್ವರ, ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಶಾಸಕರು ಇದೇ ಸಂದರ್ಭದಲ್ಲಿ ಸಚಿವರನ್ನು ಭೇಟಿಯಾಗಿ ಕ್ಷೇತ್ರದ ಸಾರ್ವಜನಿಕರ ಪರವಾಗಿ ಪತ್ರ ಮುಖೇನ ಮನವಿ ಮಾಡಿದ್ದಾರೆ.ಹಾಗೂ ಜಿಲ್ಲೆಯಲ್ಲಿ ಸಮರ್ಪಕ ಆಂಬುಲೆನ್ಸ್ ಸೇವೆ ಮತ್ತು ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡಲು ಒತ್ತಾಯಿಸಿದರು. ಶಾಸಕರ ಕೋರಿಕೆಗೆ ಸಚಿವರು ಸಕಾರಾತ್ಮಕ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂಬುದಾಗಿ ಶಾಸಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
















