ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾದಕ ದ್ರವ್ಯಗಳ ಸೇವನೆಯು ಯುವಜನತೆಯ ಭವಿಷ್ಯ, ಆರೋಗ್ಯ ಹಾಗೂ ಕುಟುಂಬ ವ್ಯವಸ್ಥೆಯ ಮೇಲೆಯೇ ತೀವ್ರ ಹಾನಿ ಉಂಟು ಮಾಡುತ್ತದೆ. ದುರಭ್ಯಾಸಗಳಿಗೆ ಬಲಿಯಾಗದೆ, ‘ನೋ’ ಹೇಳುವ ಧೈರ್ಯ ಬೆಳೆಸಿಕೊಂಡು ಯುವಜನತೆ ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕುಂದಾಪುರದ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್ ಕರೆ ನೀಡಿದರು.

ಅವರು ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕುಂದಾಪುರ, ಬಾರ್ ಅಸೋಸಿಯೇಷನ್ ರಿ. ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ (ಕಂಡ್ಲೂರು) ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮ-2026 ಅನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಾದಕ ವ್ಯಸನವೆಂಬ ಸೈಲೆಂಟ್ ಕಿಲ್ಲರ್ನಿಂದ ಯುವ ಜನತೆಯನ್ನು ರಕ್ಷಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕುಂದಾಪುರದ ಸಹಾಯಕ ಸರ್ಕಾರಿ ಅಭಿಯೋಜಕರಾದ ಉದಯಕುಮಾರ್ ಬಿ.ಎ. ಅವರು ವಿಷಯ ಮಂಡಿಸಿ, ಸ್ನೇಹಿತರ ಒತ್ತಡ ಅಥವಾ ಕ್ಷಣಿಕ ಸುಖಕ್ಕಾಗಿ ಆರಂಭವಾಗುವ ಡ್ರಗ್ಸ್ ಸೇವನೆ ಕೊನೆಗೆ ಜೀವನವನ್ನೇ ಬಲಿ ತೆಗೆದುಕೊಳ್ಳುತ್ತದೆ. ಮಾದಕ ದ್ರವ್ಯ ನಿಷೇಧ ಕಾಯ್ದೆಯಡಿ (NDPS) ಬರುವ ಕಾನೂನು ಪರಿಣಾಮಗಳು, ಜೈಲು ಶಿಕ್ಷೆ ಹಾಗೂ ಅಪರಾಧ ಪ್ರಕರಣಗಳು ವಿದ್ಯಾರ್ಥಿಗಳ ಭವಿಷ್ಯದ ಉದ್ಯೋಗ ಮತ್ತು ಶಿಕ್ಷಣದ ಮೇಲೆ ಬೀರುವ ಭೀಕರ ಪರಿಣಾಮಗಳ ಕುರಿತು ಅವರು ವಿವರಣೆ ನೀಡಿದರು. ದುಷ್ಪರಿಣಾಮಗಳ ಅರಿವು ಹೊಂದಿದ್ದು, ಯಾವುದೇ ಕಾರಣಕ್ಕೂ ವ್ಯಸನಗಳಿಗೆ ಮಣಿಯದಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬಾರ್ ಅಸೋಸಿಯೇಷನ್ ರಿ. ಕುಂದಾಪುರ ಇದರ ಅಧ್ಯಕ್ಷರಾದ ಜೆ. ಶ್ರೀನಾಥ್ ರಾವ್ ಮಾತನಾಡಿ, ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಇಲಾಖೆ ಜೊತೆ ಕೈಜೋಡಿಸಬೇಕು, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಅಭಿಯಾನದ ಭಾಗವಾಗಿ ಯುವಜನತೆಗೆ ‘ಬೇಡ BRO’ ಹಾಗೂ ‘RISE’ (Refuse, Inform, Support, Empower) ತತ್ವಗಳನ್ನು ಸಾರುವ ವಿಶೇಷ ಜಾಗೃತಿ ಬ್ಯಾನರ್ಗಳನ್ನು ಅನಾವರಣಗೊಳಿಸಲಾಯಿತು.
ಕುಂದಾಪುರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರಾದ ಸಂತೋಷ್ ಕಾಯ್ಕಿಣಿ ಅವರು ಸಭಾಂಗಣದಲ್ಲಿದ್ದ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಐ.ಎಂ.ಜೆ. ಸಂಸ್ಥೆಯ ಅಕಾಡೆಮಿಕ್ ನಿರ್ದೇಶಕರಾದ ಡಾ. ಎಸ್.ಎನ್. ಭಟ್ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲೇ ಸೂಕ್ತ ಮಾರ್ಗದರ್ಶನ ಹಾಗೂ ಅರಿವು ಪಡೆದುಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.
ಸರ್ಕಾರಿ ಅಭಿಯೋಜಕರಾದ ಇಂದಿರಾ ನಾಯ್ಕ್ ಮಾತನಾಡಿ, ಇಂದಿನ ಯುವಜನತೆಯ ಜವಾಬ್ದಾರಿ ಏನು ಎಂಬುದನ್ನು ಮನ ಮುಟ್ಟುವಂತೆ ತಿಳಿಸಿದರು.
ಕುಂದಾಪುರದ ಸಹಾಯಕ ಸರ್ಕಾರಿ ಅಭಿಯೋಜಕರಾದ ಉಮಾ ದಾಮೋದರ ನಾಯ್ಕ್ ಮಾತನಾಡಿ, ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರವೇನು ಎಂಬುದನ್ನು ಸವಿವರವಾಗಿ ತಿಳಿಸಿದರು.
ಪ್ರಾಂಶುಪಾಲರಾದ ಡಾ.ರಾಮಕೃಷ್ಣ ಹೆಗಡೆ ಅವರು ಕಾಲೇಜಿನಲ್ಲಿ ಇಂತಹ ಮಹತ್ತರವಾದ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ ನಮ್ಮ ವಿದ್ಯಾರ್ಥಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ ಎಂದು ಭರವಸೆ ನೀಡಿದರು.
ವೇದಿಕೆಯಲ್ಲಿ ಕುಂದಾಪುರದ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರ್ ಜಿ., 2ನೇ ಹೆಚ್ಚುವರಿ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಸಯ್ಯದ್ ಕಾಶ್ಮೀರ ಸಿಮ್ರನ್ ಹಲವು ಗಣ್ಯರು ಉಪಸ್ಥಿತರಿದ್ದು ಕುಂದಾಪುರ ಪೊಲೀಸ್ ಉಪನಿರೀಕ್ಷಕರಾದ ನಿರಂಜನ್ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿನಿ ಕರುಣ ಗೌಡ ಹಾಗೂ ಪ್ರಾಧ್ಯಾಪಕಿ ಸೂಕ್ಷ್ಮ ಅಡಿಗ ಕಾರ್ಯಕ್ರಮ ನಿರೂಪಿಸಿದರು .ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಬಹುಸಂಖ್ಯೆಯಲ್ಲಿ ಭಾಗವಹಿಸಿದ್ದರು. ರಾಷ್ಟ್ರಗೀತೆಯೊಂದಿಗೆ ಜಾಗೃತಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.
ಇದೇ ಸಂದರ್ಭದಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಹಾಗೂ ವ್ಯಸನದ ಹಾನಿಯನ್ನು ವಿವರಿಸುವ 4 ಕಿರು ಜಾಗೃತಿ ವೀಡಿಯೋಗಳನ್ನು ಪ್ರದರ್ಶಿಸಲಾಯಿತು.
















