ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಆನ್ ಸೈಟ್ ಆಕ್ಸಿಜನ್ ಉತ್ಪಾದನಾ ಘಟಕ ಮಂಜೂರಾಗಿದ್ದು, ಕೋವಿಡ್ ಹಾಗೂ ಇತರೆ ಆಕ್ಸಿಜನ್ ಆಗತ್ಯವಿರುವ ರೋಗಿಗಳ ಚಿಕಿತ್ಸೆಗೆ ನೆರವಾಗಲಿದೆ. ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗುತ್ತಿದ್ದು, ಪ್ರತಿನಿತ್ಯ 80 ಸಿಲಿಂಡರ್ನಷ್ಟು ಆಕ್ಸಿಜನ್ ಉತ್ಪಾದನೆಯಾಗಲಿದೆ.
ರಾಜ್ಯದಲ್ಲಿ ಒಟ್ಟು 40 ಕಡೆಗಳಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಮಂಜೂರಾತಿ ದೊರೆತಿದ್ದು, ಉಡುಪಿ ಜಿಲ್ಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ತಾಲೂಕು ಆಸ್ಪತ್ರೆಗೆ 390 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಉತ್ಪಾದನಾ ಘಟಕ ದೊರೆತಿದೆ. ಬೈಂದೂರು ಸರಕಾರಿ ಆಸ್ಪತ್ರೆ ಆವರಣದ ಪ್ರತ್ಯೇಕ ಕಟ್ಟಡದಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಈಗಾಗಲೇ ಸ್ಥಳ ಪರಿಶೀಲನೆ ನಡೆದಿದ್ದು, ವಿದ್ಯುತ್ ಹಾಗೂ ಗುತ್ತಿಗೆ ಕಾಮಗಾರಿ ಶೀಘ್ರದಲ್ಲಿ ಆರಂಭವಾಗಲಿದೆ. ಒಂದು ತಿಂಗಳ ಒಳಗೆ ಆಕ್ಸಿಜನ್ ಘಟಕ ಸೇವೆಗೆ ಲಭ್ಯವಾಗಿದೆ. ಉತ್ಪಾದನೆಯಾಗಲಿರುವ ಆಕ್ಸಿಜನ್ ಬೇರೆಡೆ ಸಾಗಿಸಲು ಸಾಧ್ಯವಿಲ್ಲದ ಕಾರಣ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆಗೆ ಈ ಘಟಕ ಲಭ್ಯವಾಗಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಬೈಂದೂರಿನಲ್ಲಿ ಆಕ್ಸಿಜನ್ ಸ್ಥಾಪಿಸುವುದಕ್ಕಾಗಿ ಈ ಹಿಂದೆ ಸರಕಾರಕ್ಕೆ ಮನವಿ ಮಾಡಿದ್ದರು. /ಕುಂದಾಪ್ರ ಡಾಟ್ ಕಾಂ ಸುದ್ದಿ/
ಬೈಂದೂರು ಶಾಸಕರ ಭೇಟಿ:
ಬೈಂದೂರು ಸಾರ್ವಜನಿಕ ಆಸ್ಪತ್ರೆಯ ಆಕ್ಸಿಜನ್ ಘಟಕ ನಿರ್ಮಾಣವಾಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಆಸ್ಪತ್ರೆಯ ವೈದ್ಯರು ಹಾಗೂ ಗುತ್ತಿಗೆದಾರ ಕಂಪೆನಿ ಪ್ರತಿನಿಧಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿ, ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಅವಶ್ಯಕತೆ ಹೆಚ್ಚಿರುವ ಕಾರಣದ ರಾಜ್ಯದಲ್ಲಿ ಬೈಂದೂರು ಸೇರಿದಂತೆ ಒಟ್ಟು 40 ಕಡೆಗಳಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಮಂಜುರಾತಿ ದೊರೆತಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ. ಬೈಂದೂರಿನಲ್ಲಿ ಕೋವಿಡ್ ರೋಗಿಗಳಿಗೆ ಪ್ರತ್ಯೇಕ ಬೆಡ್ ಮೀಸಲಿರುಸುವ ಬಗ್ಗೆ ಉಸ್ತುವಾರಿ ಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಆಸ್ಪತ್ರೆಯಲ್ಲಿ ಕೊರತೆಯಿರುವ ವೈದ್ಯರನ್ನು ನೇಮಿಸಲು ಈಗಾಗಲೇ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದರು.
ಈ ಸಂದರ್ಭ ಜಿ.ಪಂ ಸದಸ್ಯ ಸುರೇಶ್ ಬಟವಾಡಿ, ಆಸ್ಪತ್ರೆಯ ವೈದ್ಯರಾದ ಡಾ. ನಂದಿನಿ, ಡಾ. ಮಹೇಂದ್ರ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಸನ್ನ ಕುಮಾರ್ ಉಪ್ಪುಂದ, ಸುಧಾಕರ ಶೆಟ್ಟಿ ನೆಲ್ಯಾಡಿ ಮೊದಲಾದವರಿದ್ದರು.